ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಎಸ್. ಹೊಸಕೋಟೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಸಿಹಿ ಹಂಚಿ, ಸಂಭ್ರಮಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗ್ರಾಮದ ಎಲ್ಲಾ ಮನೆಗಳಿಗೆ ಸಿಹಿ ವಿತರಣೆ ಮಾಡಿದರು.
ಈ ವೇಳೆ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ವರುಣ ಕ್ಷೇತ್ರದಿಂದ ಜಯಗಳಿಸಿ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯರವರು ಅಧಿಕಾರವನ್ನು ಪಡೆದುಕೊಂಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.
ಇಡೀ ರಾಜ್ಯಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ಅವರು ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಯಾವುದೇ ಕೆಲಸಗಳನ್ನು ನಾವೇ ನಿಂತು ಜನರಿಗೆ ಅನುಕೂಲವಾಗುವಂತೆ ಮಾಡಿಕೊಡುತ್ತೇವೆ.
ವರುಣ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಸಿದ್ದರಾಮಯ್ಯ ಜಯಭೇರಿ ಬಾರಿಸಿದ್ದಾರೆ. ಈ ಗೆಲುವಿಗೆ ಕಾರಣಕರ್ತರು ಕ್ಷೇತ್ರದ ಮತದಾರರು. ಕ್ಷೇತ್ರದ ಎಲ್ಲಾ ಸಮುದಾಯದ ಮನೆಗಳಿಗೂ ತೆರಳಿ ಸಿಹಿ ಹಂಚುತ್ತಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿಎಮ್ ರಾಮು ಮಾಜಿ ತಾಪಂ ಅಧ್ಯಕ್ಷ ರಂಗಸ್ವಾಮಿ ನಾಯಕ, ಕಾಂಗ್ರೆಸ್ ಪಕ್ಷದ ಮುಖಂಡರಾದ ಹೇಮಂತ್, ಗ್ರಾಪಂ ಸದಸ್ಯ ಆನಂದ್, ಶ್ರೀಕಂಠ, ಕೇಬಲ್ ಮಾದೇಶ್, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.