ಲಕ್ನೋ : ಉತ್ತರ ಪ್ರದೇಶದ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಇತ್ತೀಚಿಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ.
ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇದಕ್ಕಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಲಿದ್ದು, ಅಯೋಧ್ಯೆ, ಲಕ್ನೋ, ಅಲಿಗಡ, ಇಟಾಹ್, ಬುಲಂದ್ ಶಹರ್ ಮತ್ತು ಪ್ರಯಾಗರಾಜ್ ನಲ್ಲಿ ತಲಾ ಒಂದು ಪಿಡಬ್ಲ್ಯೂಡಿ ಮುಖ್ಯ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದರು. ಪಿಡಬ್ಲ್ಯುಡಿ ಅಧಿಕಾರಿಗಳು ಶೀಘ್ರದಲ್ಲೇ ಈ ಕುರಿತು ಪ್ರಸ್ತಾವನೆ ಕಳುಹಿಸುತ್ತಾರೆ ಎಂದು ಅವರು ಹೇಳಿದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಗ್ ಶನಿವಾರ ರಾತ್ರಿ ಇಲ್ಲಿನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು.