ನವದೆಹಲಿ : ಕೇಂದ್ರ ಸರ್ಕಾರ ಇತ್ತೀಚೆಗೆ ’ಸರ್ಕಾರಿ ಆಸ್ತಿ ನಗದೀಕರಣ’ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ, ಈ ಯೋಜನೆಯ ವಿರುದ್ದ ಕಾಂಗ್ರೆಸ್ ತೀವ್ರ ಅಸಮಾಧಾನವನ್ನು ಹೊರಹಾಕಿತ್ತು. ಬಿಜೆಪಿಯು ದೇಶದ ಸಾರ್ವಜನಿಕ ಆಸ್ತಿಯನ್ನು ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ಬಹಿರಂಗ ಹೇಳಿಕೆ ನೀಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಆದರೆ, ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲಿಯೇ ಲೂಟಿ ಇದೆ ಎಂದು ಆರೋಪಿಸುವ ಮೂಲಕ ಪ್ರತಿ ದಾಳಿ ನಡೆಸಿದ್ದಾರೆ.
ಛತ್ತೀಸ್ಗಢ ರಾಜಧಾನಿ ರಾಯ್ಪುರದಲ್ಲಿ ಮಾತನಾಡಿರುವ ಸಚಿವೆ ನಿರ್ಮಲಾ ಸೀತಾರಾಮನ್ , “ಲೂಟಿಯು ಕಾಂಗ್ರೆಸ್ನ ಮನಸ್ಸಿನಿಂದ ಹೊರಹೋಗುವುದಿಲ್ಲ. ಅವರ ಆಳ್ವಿಕೆಯಲ್ಲಿ ಸ್ಪೆಕ್ಟ್ರಮ್, ಗಣಿ, ನೀರು ಸೇರಿದಂತೆ ಎಲ್ಲಾ ವಲಯದಲ್ಲೂ ಲೂಟಿ ಹರಡಿಕೊಂಡಿತ್ತು” ಎಂದು ವಾಗ್ದಾಳಿ ನಡೆಸಿದ್ದಾರೆ.
ಇದುವರೆಗೂ ಉಪಯೋಗವಾಗಿಲ್ಲದ ಅಥವಾ ಹೆಚ್ಚು ಉಪಯೋಗಕ್ಕೆ ಬಂದಿಲ್ಲದ ಸರ್ಕಾರದ ಆಸ್ತಿಗಳ ನಿರ್ವಹಣೆಯನ್ನು ಖಾಸಗಿಯವರಿಗೆ ಕೊಟ್ಟು, ಅವರಿಂದ ಮುಂದಿನ ನಾಲ್ಕು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ ಶುಲ್ಕ ಸಂಗ್ರಹಿಸುತ್ತೇವೆ ಎಂದು ಈವರ್ಷದ ಆಗಸ್ಟ್ನಲ್ಲಿ ನ್ಯಾಷನಲ್ ಮಾನಿಟೈಸೆಶನ್ ಪೈಪ್ಲೈನ್ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಈ ಯೋಜನೆ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ವಿತ್ತ ಸಚಿವೆ, “ಜನರಿಗೆ ಸೇವೆ ಮಾಡವ ಹೊರತಾಗಿಯೂ, ಕಾಂಗ್ರೆಸ್ ನಾಯಕ ಕೇವಲ ಅಧಿಕಾರದಲ್ಲಿ ಉಳಿಯುವತ್ತ ಗಮನ ಹರಿಸಿದ್ದಾರೆ. ಕಾಂಗ್ರೆಸ್ ಜನರ ಆಶೀರ್ವಾದದಿಂದ ಪಡೆಯುವ ಬಹುಮತವನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಅವರ ಶಾಸಕರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಆದರೆ, ಮುಖ್ಯಮಂತ್ರಿಗಳು ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳುತ್ತಿದ್ದಾರೆ” ಎಂದು ನಿರ್ಮಲಾ ಸೀತಾರಾಮನ್ ವ್ಯಂಗ್ಯವಾಡಿದ್ದಾರೆ.
ಮಂಗಳವಾರ ಕೂಡ ಇಂಧನ ಬೆಲೆಗಳು ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಅಂತರಾಷ್ಟ್ರೀಯ ತೈಲ ದರಗಳ ಮೇಲೆ ಅವಲಂಬಿತವಾಗಿವೆ ಎಂದು ಸೀತಾರಾಮನ್ ಹೇಳಿದ್ದಾರೆ.