ಉತ್ತರ ಭಾರತ : ದೇಶದಲ್ಲಿ ವಾಯು ಮಾಲಿನ್ಯ ಪ್ರಮಾಣ ಭೌಗೋಳಿಕವಾಗಿ ವಿಸ್ತರಿಸಿದೆ. ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ವ್ಯಕ್ತಿಯ ಜೀವಿತಾವಧಿ ಕಡಿಮೆಯಾಗಲು ಕಾರಣವಾಗಿದೆ ಎಂದು ಹೊಸ ಅಧ್ಯಯನ ಹೇಳಿದೆ. ಯೂನಿವರ್ಸಿಟಿ ಆಫ್ ಚಿಕಾಗೋ ಸಿದ್ಧಪಡಿಸಿರುವ ‘ಏರ್ ಕ್ವಾಲಿಟಿ ಲೈಫ್ ಇಂಡೆಕ್ಸ್’ (ಎಕ್ಯೂಎಲ್ಐ) ಎಂಬ ಅಧ್ಯಯನ ವರದಿಯಲ್ಲಿ ಈ ಕಳವಳಕಾರಿ ಅಂಶಗಳಿವೆ.
ಶುದ್ಧ ಗಾಳಿಯನ್ನು ಉಸಿರಾಡುವ ವ್ಯಕ್ತಿಯ ಆಯುಷ್ಯ ಎಷ್ಟಿರಲಿದೆ ಎಂಬ ಬಗ್ಗೆ ವಿಶ್ವವಿದ್ಯಾಲಯ ಅಧ್ಯಯನ ಕೈಗೊಂಡಿತ್ತು.
ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ವಾಯುಮಾಲಿನ್ಯ ಪ್ರಮಾಣದಲ್ಲಿ ವಿಪರೀತ ಹೆಚ್ಚಳ ಕಂಡುಬಂದಿದೆ. ಈ ಎರಡು ರಾಜ್ಯಗಳಲ್ಲಿನ ವ್ಯಕ್ತಿಯ ಸರಾಸರಿ ಆಯಸ್ಸು 2.5 ರಿಂದ 2.9 ವರ್ಷಗಳಷ್ಟು ಕಡಿಮೆಯಾಗಲು ವಾಯುಮಾಲಿನ್ಯ ಕಾರಣವಾಗಿದೆ ಎಂದು ಈ ಅಧ್ಯಯನ ಹೇಳಿದೆ.
ಗಂಗಾ ನದಿ ಪಾತ್ರದಲ್ಲಿ ದೇಶದ ಒಟ್ಟು ಜನಸಂಖ್ಯೆಯ ಶೇ 40ರಷ್ಟು ಜನರು ವಾಸ ಮಾಡುತ್ತಿದ್ದಾರೆ. ವಿಶ್ವದ ಇತರ ಯಾವುದೇ ಪ್ರದೇಶಕ್ಕೆ ಹೋಲಿಸಿದರೂ, ಈ ಪ್ರದೇಶದಲ್ಲಿ ಮಾಲಿನ್ಯದ ಪ್ರಮಾಣವೂ ಅಧಿಕ’ ಎಂದು ವರದಿಯಲ್ಲಿ ವಿವರಿಸಲಾಗಿದೆ.
ಉತ್ತರ ಭಾರತದಲ್ಲಿ 2019ರಲ್ಲಿ ದಾಖಲಾಗಿದ್ದ ಮಾಲಿನ್ಯದ ಮಟ್ಟ ಅದೇ ಪ್ರಮಾಣದಲ್ಲಿಯೇ ಮುಂದುವರಿದರೆ, ಆ ಭಾಗದ ಜನರು ತಮ್ಮ ಆಯುಷ್ಯದಲ್ಲಿ 9ಕ್ಕೂ ಹೆಚ್ಚು ವರ್ಷಗಳನ್ನು ಕಳೆದುಕೊಳ್ಳುವರು ಎಂದು ಈ ಅಧ್ಯಯನ ನಡೆಸಿರುವ ತಜ್ಞರು ಎಚ್ಚರಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪ್ರಕಾರ ಮಾಲಿನ್ಯದ ಪ್ರಮಾಣವನ್ನು ಕಡಿಮೆ ಮಾಡಿದರೆ, ಭಾರತ, ಬಾಂಗ್ಲಾದೇಶ, ನೇಪಾಳ ಹಾಗೂ ಪಾಕಿಸ್ತಾನಗಳಲ್ಲಿ ವಾಸಿಸುವ ವ್ಯಕ್ತಿ 5.6 ವರ್ಷಗಳಷ್ಟು ಹೆಚ್ಚು ಅವಧಿಗೆ ಜೀವಿಸಲು ಸಾಧ್ಯ ಎಂದೂ ಹೇಳಿದ್ದಾರೆ.